
ಕಡಬ: ದಿನಾಂಕ:13-06-2025(ಹಾಯ್ ಉಡುಪಿ ನ್ಯೂಸ್)ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿ ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯದೆ ಖಡಕ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅರುಣ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಆರಂಭಿಸಿದ್ದಾರೆ .
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕರ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದಲ್ಲಿಗೆ ದಾಳಿ ನಡೆಸಿ 3 ಜನರನ್ನು ಬಂಧಿಸಿದ್ದಾರೆ.ಹಲವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿದ್ದ 6 ಬೈಕು,2ಕಾರು,4ಕೋಳಿ, ಕೋಳಿ ಬಾಳು, ನಗದು ಹಣ 3,560ರೂ.ವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.ಉಡುಪಿಯಲ್ಲಿ ಕೋಳಿ ಅಂಕದ ವಿಷಯದಲ್ಲಿ ಭಾರೀ ಚರ್ಚೆ ಗೆ ಗ್ರಾಸವಾಗಿದ್ದ ಅರುಣ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಖಡಕ್ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.