
ದಿನಾಂಕ:11-07-2025(ಹಾಯ್ ಉಡುಪಿ ನ್ಯೂಸ್)
ಮೈಸೂರು : ದೇವನಹಳ್ಳಿ ರೈತರ ಹೋರಾಟ ವಿಚಾರದಲ್ಲಿ ಜುಲೈ 15ರವರೆಗೆ ಸಮಯ ಕೇಳಿದ ರಾಜ್ಯ ಸರ್ಕಾರ ಈಗ ಡಿಪೆನ್ಸ್ ಕಾರಿಡಾರ್ ಸ್ಥಾಪನೆಗೆ ಕೇಂದ್ರದಿಂದ ಅನುಮತಿ ಕೇಳುವ ಮೂಲಕ ರೈತರಿಗೆ ದ್ರೋಹ ಬಗೆಯುತ್ತಿದೆ ಎಂದು ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ ಹೊಸ ನಾಟಕ ಮಾಡುತ್ತಿದ್ದಾರೆ. ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುವ ಮೂಲಕ ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1,700 ಎಕರೆಯಲ್ಲಿ ಡಿಪೆನ್ಸ್ ಕಾರಿಡಾರ್ ಸ್ಥಾಪನೆಗೆ ಅನುಮತಿ ಕೇಳಿದ್ದಾರೆ. ಕಾರಿಡಾರ್ ಗೆ ಯಾಕೆ ಇಷ್ಟೊಂದು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ ಎಂದು ಸವಾಲು ಹಾಕಿದರು.
ಕಾರಿಡಾರ್ ಗೆ ಕೇವಲ 100 ಎಕರೆ ಬಳಸಿ ಉಳಿಸಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಅಲ್ಲಿ ನಮ್ಮ ರೈತರು ಕೂಲಿಯಾಳುಗಳಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ. ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ ಎಂದು ವಾಗ್ದಾಳಿ ನಡೆಸಿದರು.