IMG_20260322_232518.jpg
Spread the love

ದಿನಾಂಕ:22-03-2026 (ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಸ್ವಾತಂತ್ರ್ಯ ಬಂದ ನಂತರದಲ್ಲಿ ಸತತ 3ನೇ ಬಾರಿಗೆ ಪ್ರಧಾನಿಗಳಾಗಿ ಮೋದಿ ಅವರ ಜನಪ್ರಿಯತೆ ಯಾವತ್ತೂ ಕುಗ್ಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು, 8,931 ದಿನಗಳ ಕಾಲ ನಿರಂತರವಾಗಿ ಆಡಳಿತ ನಡೆಸುತ್ತಿರುವುದು ನಮ್ಮೆಲ್ಲರಿಗೂ ತುಂಬ ಸಂತೋಷ ತಂದು ಕೊಟ್ಟ ವಿಚಾರ. ಇದು ಬಹಳ ದೊಡ್ಡ ಮೈಲಿಗಲ್ಲು ಎಂದರು.

ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಬಗ್ಗೆ ಇವತ್ತು ದೇಶಾದ್ಯಂತ ಶ್ಲಾಘನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಭಾರತವು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸಾಗುತ್ತಿರುವ ಸಂದರ್ಭದಲ್ಲಿ ಮೋದಿಜೀ ಅವರು ದಿಟ್ಟ ನಾಯಕತ್ವ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಾಗಲಕೋಟೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ್, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸ್ ಕರಿಯಪ್ಪ ನಮ್ಮ ಅಭ್ಯರ್ಥಿಯಾಗಿದ್ದಾರೆ. ಕಾರ್ಯಕರ್ತರಲ್ಲಿ ರಣೋತ್ಸಾಹ ಕಾಣುತ್ತಿದೆ. ಮತ್ತೊಂದು ಕಡೆ ಮತದಾರರು ರಾಜ್ಯ ಸರಕಾರದ ವಿರುದ್ಧ ಬೇಸತ್ತಿದ್ದಾರೆ. ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಯುವಜನತೆಯ ಭವಿಷ್ಯವನ್ನು ಹಾಳುಗೆಡಹಿದ ಈ ಕಾಂಗ್ರೆಸ್ ಸರಕಾರದ ವಿರುದ್ಧ ಜನರು ದಂಡೇಳುವ ಪರಿಸ್ಥಿತಿಯಲ್ಲಿ ಉಪ ಚುನಾವಣೆ ಘೋಷಣೆ ಆಗಿದೆ.

ಬಾಗಲಕೋಟೆ ಕ್ಷೇತ್ರದ ಪ್ರಜ್ಞಾವಂತ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತಾರೆ. ಹಿರಿಯರಾದ ವೀರಣ್ಣ ಚರಂತಿಮಠ್ ಅವರು ಗೆದ್ದು ಬಂದೇ ಬರುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.

ಅದೇರೀತಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಒಂದು ಅಚ್ಚರಿಯ ಫಲಿತಾಂಶ ಬರಲಿದ್ದು, ಬಿಜೆಪಿ ಅಭ್ಯರ್ಥಿ ಗೆದ್ದು ಬರುತ್ತಾರೆ ಎಂದು ವಿಶ್ವಾಸದಿಂದ ತಿಳಿಸಿದರು.

ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೂ ಚರ್ಚೆ ಮಾಡಿದ್ದೇನೆ. ಅವರೂ ಸಂಪೂರ್ಣ ಬೆಂಬಲ ಕೊಡುತ್ತಿದ್ದಾರೆ ಎಂದು ಹೇಳಿದರು. ಇದೆಲ್ಲದರ ಪರಿಣಾಮವಾಗಿ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲಲಿದ್ದೇವೆ ಎಂದರು.

error: No Copying!